ಬೆಂಗಳೂರು: ಅಕ್ಟೋಬರ್ 30ರಂದು ನಡೆದ ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು ಘೋಷಣೆಯಾಗಲಿದೆ. ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಸಿಂಧಗಿಯಲ್ಲಿ ಬಿಜೆಪಿ ಮತ್ತು ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಮುಸ್ಲಿಂ ಅಭ್ಯರ್ಥಿಗಳಿಗೆ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್ ನೀಡಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದ ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
ಉಪಚುನಾವಣೆ ಆಡಳಿತಾರೂಢ ಬಿಜೆಪಿಗೆ ಪ್ರತಿಷ್ಠೆಯಾಗಿದ್ದು, ಹಾನಗಲ್ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರಚಾರದ ವೇಳೆಯಲ್ಲಿ ಠಿಕಾಣಿ ಹೂಡಿದ್ದರು. ಆದರೂ ಈ ಕ್ಷೇತ್ರದಲ್ಲಿ ಸದ್ಯ ಬಿಜೆಪಿ ಹಿನ್ನಡೆ ಅನುಭವಿಸಿದೆ.
ಇನ್ನು ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗಿತ್ತಾದರೂ ಇತ್ತೀಚಿನ ವರದಿಯ ಪ್ರಕಾರ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಸಿಂದಗಿಯಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ರಮೇಶ್ ಭೂಸನೂರು 4,850 ಮತಗಳ ಮುನ್ನಡೆ ಕಾಯ್ದುಕೊಂಡು ಇದುವರೆಗೆ 13,081 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇದುವರೆಗೆ 8,231 ಮತಗಳನ್ನು, ಜೆಡಿಎಸ್ 423 ಮತಗಳು ಮತ್ತು ನೋಟಾ ಮತಗಳು 133 ಬಿದ್ದಿವೆ.
ಹಾನಗಲ್ ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಮಧ್ಯೆ ನೇರ ಹಣಾಹಣಿ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ 9,೦25 ಮತಗಳನ್ನು ಬಿಜೆಪಿ ಅಭ್ಯರ್ಥಿ 8,897 ಮತಗಳನ್ನು ಮತ್ತು ಜೆಡಿಎಸ್ ಅಭ್ಯರ್ಥಿ 75 ಮತಗಳನ್ನು ಪಡೆದುಕೊಂಡಿದ್ದಾರೆ.
ಇದನ್ನೂ ಓದಿರಿ: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಗೌಡ ಆರೋಗ್ಯ ವಿಚಾರಿಸಿದ ಶಿವರಾಮ್ ಹೆಬ್ಬಾರ್